Sagar : ಖ್ಯಾತ ಸಾಹಿತಿ ನಾ.ಡಿಸೋಜ ವಿಧಿವಶ
ಶಿವಮೊಗ್ಗ ಜಿಲ್ಲೆಯ ಸಾಗರದ ಖ್ಯಾತ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಖಾಯಿಲೆಯಿಂದ ಭಾನುವಾರ ಸಂಜೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ .
ಹಲವು ದಿನದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು.
ಮಕ್ಕಳಾದ ಶೋಭಾ,ನವೀನ,ಸಂತೋಷ ಹಾಗೂ ಪತ್ನಿ ಫಿಲೋಮಿನ ಡಿಸೋಜ ರವರನ್ನು ಅಗಲಿದ್ದಾರೆ.
ನಾ. ಡಿಸೋಜ ಜೂನ್ ೬, ೧೯೩೭ ರಲ್ಲಿ ಜನಿಸಿದ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸುತಿದ್ದರು .
ನಾಳೆ ಮಧ್ಯಾಹ್ನ ಸಾಗರದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಸಾಗರದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ನಾಳೆ ಸಾಗರ ತಾಲೂಕಿನಾಧ್ಯಾಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:-Karnataka: ದ್ವಿತೀಯ PUC ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.
ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ಅವರ ಸಾಹಿತ್ಯ ಕೃಷಿಗೆ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು, ರಾಜ್ಯ ಪ್ರಶಸ್ತಿ ,ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಅಕಾಡಮಿ ಪ್ರಶಸ್ತಿ,ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗೆ ಬಾಜನರಾಗಿದ್ದರು.
ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಸಿನೇಟ ಸದಸ್ಯರಾಗಿ ,ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ರಾಗಿ ,ಪುಸ್ತಕ ಪ್ರಾಧಿಕಾರ ಸದಸ್ಯರಾಗಿ ,ಕುವೆಂಪು ವಿಶ್ವವಿದ್ಯಾಲಯ ಸಿನೇಟ್ ಸದಸ್ಯರಾಗಿ,ಶಿವಮೊಗ್ಗಾ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆಡಳಿತ ಪರಿಷತ್ ಸದಸ್ಯ ರಾಗಿ ಕನ್ನಡ ಸೇವೆ ಮಾಡಿದ್ದರು.
ನಾಡಿಸೋಜ ಅವರ ಹಲವಾರು ಸಣ್ಣ ಕಥೆಗಳು ಕೊಂಕಣಿ, ಮಲಯಾಳಂ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿವೆ. ತುಂಜಾಲು ಕಾದಂಬರಿಯು ತೆಲುಗು ಭಾಷೆಗೆ, ಪ್ರೀತಿಯೊಂದೇ ಸಾಲದೆ, ಜಲಪಾತದ ಸುತ್ತ, ಇಗರ್ಜಿ ಸುತ್ತಲಿನ ಹತ್ತು ಮನೆಗಳು, ಕಾಡಿನ ಬೆಂಕಿ, ತಿರುವು ಮುಂತಾದ ಕಾದಂಬರಿಗಳು ಕೊಂಕಣಿಗೆ, ಇಗರ್ಜಿ ಕಾದಂಬರಿ, ದ್ವೀಪ, ಬಾಲಗಂಧರ್ವ ಮತ್ತು ಏಸುಕ್ರಿಸ್ತ ಕೃತಿಗಳು ಇಂಗ್ಲಿಷ್ಗೂ, ನೇತ್ರಾಣಿ ಗುಡ್ಡಕ್ಕೆ ಯಾತ್ರೆ ಕೃತಿಯು ಹಿಂದಿ ಭಾಷೆಗೂ ಅನುವಾದಗೊಂಡಿದೆ.
ಮುಳುಗಡೆ’, ‘ಕೊಳಗ’, ‘ಒಳಿತನ್ನು ಮಾಡಲು ಬಂದವರು’, ‘ಬಣ್ಣ’, ‘ಪಾದರಿಯಾಗುವ ಹುಡುಗ’, ‘ಇಬ್ಬರು ಮಾಜಿಗಳು’ ಮುಂತಾದ ಕಾದಂಬರಿಗಳು ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗದ ಬಿ.ಎಸ್ಸಿ., ಬಿ.ಕಾಂ., ತರಗತಿಗಳಿಗೆ, ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎ. ತರಗತಿಗಳಿಗೆ, ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ. ತರಗತಿಗಳಿಗೆ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವೂ ಸೇರಿದಂತೆ ಮುಂತಾದೆಡೆಗಳಲ್ಲಿ ಪಠ್ಯಪುಸ್ತಕಗಳಾಗಿಯೂ ಆಯ್ಕೆಯಾಗಿದೆ.ಇವರ ಕಾದಂಬರಿಗಳು ಚಲನ ಚಿತ್ರವಾಗಿದೆ.